ಕಾರ್ಕಳದ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡುವ ಅಧಿಕಾರ ಮತ್ತು ಜವಾಬ್ದಾರಿ ಸರ್ಕಾರಕ್ಕಿದೆ. ಅದೇ ಅಧಿಕಾರದಡಿ ಸರ್ಕಾರ ಸಮಿತಿಯನ್ನು ರಚಿಸಿದ್ದು, ಅಂಬೇಡ್ಕರ್ ಭವನದ ಅಭಿವೃದ್ಧಿ, ನಿರ್ಮಾಣ ಹಾಗೂ ಅದರ ಬೆಳವಣಿಗೆಗಾಗಿ ಸಾಕಷ್ಟು ಶ್ರಮಿಸಿದ ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಸಮಿತಿಯ ನೇಮಕಾತಿಯಲ್ಲಿ ಯಾವುದೇ ರೀತಿಯ ರಾಜಕೀಯ ಉದ್ದೇಶ ಅಥವಾ ಪಕ್ಷಪಾತಕ್ಕೆ ಅವಕಾಶ ನೀಡಿಲ್ಲ. ಸಮಾಜದ ಹಿತಾಸಕ್ತಿ ಮತ್ತು ಸಂಸ್ಥೆಯ ಸುಸೂತ್ರ ನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಆದರೆ, ಕೆಲವರು ತಮ್ಮನ್ನು ಸಮಿತಿಗೆ ಸೇರಿಸಿಲ್ಲ ಎಂಬ ಕಾರಣಕ್ಕೆ ಪತ್ರಿಕಾಗೋಷ್ಠಿ ನಡೆಸಿ ಅನಗತ್ಯ ವಿವಾದ ಸೃಷ್ಟಿಸಲು ಮುಂದಾಗಿರುವುದು ವಿಷಾದನೀಯ. ಇದು ಜನರ ನೈಜ ಸಮಸ್ಯೆಗಳಿಗಿಂತ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ನಡೆಸಲಾಗುತ್ತಿರುವ ಬಿಜೆಪಿಯ ಶುದ್ಧ ರಾಜಕೀಯ ನಡೆಯಾಗಿದೆ.
ಅಂಬೇಡ್ಕರ್ ಭವನವು ಯಾವುದೇ ಒಂದು ವ್ಯಕ್ತಿ ಅಥವಾ ಸಂಘಟನೆಯ ಆಸ್ತಿಯಲ್ಲ; ಅದು ಸಮಾಜದ ಸಮಗ್ರ ಅಭಿವೃದ್ಧಿಗಾಗಿ ನಿರ್ಮಾಣಗೊಂಡ ಸಾರ್ವಜನಿಕ ಸಂಸ್ಥೆಯಾಗಿದೆ. ಅದರ ಅಭಿವೃದ್ಧಿ ಮತ್ತು ಉತ್ತಮ ನಿರ್ವಹಣೆಗೆ ಎಲ್ಲರೂ ಸಹಕಾರ ನೀಡಬೇಕು. ಅನಗತ್ಯ ರಾಜಕೀಯ ಆರೋಪಗಳ ಮೂಲಕ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನಗಳನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಸಮಾಜದ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರವನ್ನು ಸ್ವಾಗತಿಸಿ, ಅಂಬೇಡ್ಕರ್ ಭವನದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸದಸ್ಯರಾದ ಅಣ್ಣಪ್ಪನಕ್ರೆ ಹಾಗೂ ಪ್ರತಿಮಾ ರಾಣೆ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















