ಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಹಾಗೂ ದೇಣಿಗೆ ಹಣದ ಕಳ್ಳತನದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಭಾರಿ ಕಾರ್ಯಾಚರಣೆ ನಡೆಸಿದೆ. ಪ್ರಕರಣದಲ್ಲಿ ನೇರವಾಗಿ ಹೆಸರಿಸಲಾದ 8 ಪ್ರಮುಖ ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
8ಆರೋಪಿಗಳಲ್ಲಿ ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (PA) ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಸೇರಿರುವುದು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ಇವನೊಂದಿಗೆ ಅನುಕಲ್ಪ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ, ಲವ್ ಕುಶ್ ಮಿಶ್ರಾ, ರಾಮ ಶಂಕರ್ ಮಿಶ್ರಾ ಮತ್ತು ಸುಭಾಷ್ ಶ್ರೀವಾಸ್ತವ ಎಂಬುವವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಮತ್ತು ನಗದು ಹಣವನ್ನು ಎಣಿಕೆ ಮಾಡುವ ಪ್ರಕ್ರಿಯೆಯ ಜವಾಬ್ದಾರಿ ಹೊತ್ತಿದ್ದ ತಂಡದಲ್ಲಿದ್ದರು. ದೇವಸ್ಥಾನದ ಒಳಗಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದ ಬಲವಾದ ಸಾಕ್ಷ್ಯಗಳು ಮತ್ತು ವಿಧಿವಿಜ್ಞಾನ ಪುರಾವೆಗಳ ಆಧಾರದ ಮೇಲೆ ಈ ಎಂಟು ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಠಿಣ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಾದ ಕೇವಲ ಒಂದು ದಿನದಲ್ಲೇ ಪೊಲೀಸರು ಈ ಬಂಧನದ ಕ್ರಮ ಕೈಗೊಂಡಿದ್ದಾರೆ.
ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಖನ್ನಾ, ಇದು ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರ, ಮೊದಲಿನಿಂದಲೂ ನಮ್ಮ ಸರ್ಕಾರ ಅಪರಾಧಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಹೊಂದಿದೆ. ರಾಮ ಮಂದಿರದ ಪವಿತ್ರ ದೇಣಿಗೆಯಲ್ಲಿ ತಪ್ಪು ಮಾಡಿರುವ ಯಾವುದೇ ಅಪರಾಧಿಯನ್ನು ಬಿಡುವ ಪ್ರಶ್ನೆಯೇ ಇಲ್ಲ, ಅವರಿಗೆ ಕಠಿಣ ಶಿಕ್ಷೆ ಖಂಡಿತ ಎಂದು ಭರವಸೆ ನೀಡಿದ್ದಾರೆ.

















