ಕರ್ನಾಟಕ ಸರ್ಕಾರವು ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲು ಮುಂದಾಗಿರುವ ಉದ್ದೇಶ ಏನು ಮತ್ತು ಇದರ ಹಿಂದಿರುವ ಷಡ್ಯಂತ್ರ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಆಗ್ರಹಿಸಿದ್ದಾರೆ.
ನಗರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹೊಸ ಹೊಸ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಎಸ್ಐಆರ್ ಆರಂಭವಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಮಾರ್ಗಸೂಚಿಗಳನ್ನು ಎರಡು ದಿನದ ಹಿಂದೆ ಬಿಡುಗಡೆ ಮಾಡಲಾಗಿದೆ ಎಂದು ಆಕ್ಷೇಪಿಸಿದರು.
ನಮ್ಮ ಸಂವಿಧಾನದ ಆರ್ಟಿಕಲ್ 14 ರ ಅಡಿಯಲ್ಲಿ ಭಾರತದಲ್ಲಿ ‘ಒಂದು ದೇಶ ಒಂದು ಪೌರತ್ವ’ ನಿಯಮ ಇದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಿಸಲು ಸರ್ಕಾರ ಮುಂದಾಗಿದೆ. ದೇಶದ ನಾಗರಿಕರಿಗೆ ಪೌರತ್ವ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ವಿದೇಶಿಗ ಯಾರು ಎಂಬ ಪ್ರಮಾಣ ಪತ್ರ ಕೊಡುವ, ವಲಸೆ ಪ್ರಮಾಣಪತ್ರ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ಆದರೆ ರಾಜ್ಯ ಸರ್ಕಾರ ಈಗ ನಿವಾಸಿ ಪ್ರಮಾಣ ಪತ್ರ ನೀಡುತ್ತಿರುವುದು ಏಕೆ ಎಂದು ಟೀಕಿಸಿದರು.
ನಿವಾಸಿ ಪ್ರಮಾಣ ಪತ್ರದ ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ. ಅಕ್ರಮ ವಲಸಿಗರಿಂದ ರಾಜ್ಯದ ಜನರ ಮೇಲೆ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆಯೂ ನಾವು ಕೇಳಿದ್ದೇವೆ. ಇಷ್ಟಾದರೂ ಎಚ್ಚೆತ್ತುಕೊಂಡು ಸರ್ಕಾರ ಕಾನೂನು ಉಲ್ಲಂಘಿಸಿ ಪಿಆರ್ಸಿ ನೀಡುವುದನ್ನು ಸ್ಥಗಿತಗೊಳಿಸಬೇಕು. ಕಾನೂನು ಪ್ರಕಾರ ಏನು ಮುಂದೆ ಹೋರಾಟ ಮಾಡಬಹುದು ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.



















