ಪರಿಸರ ಸಂರಕ್ಷಣೆ, ಜೀವ ವೈವಿಧ್ಯತೆಯ ಸಂರಕ್ಷಣೆ ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಎಸ್.ಆರ್. ಪಿ.ಯು. ಕಾಲೇಜು, ಹೆಬ್ರಿಯಲ್ಲಿ “ಗ್ರೀನ್ ಜೀನ್ ಕ್ಲಬ್” ಅನ್ನು ಶನಿವಾರ ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಜೀವಶಾಸ್ತ್ರ ಪ್ರಯೋಗಾಲಯದಲ್ಲಿ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಎಸ್.ಆರ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮತಿ ಸಪ್ನಾ ಎನ್. ಶೆಟ್ಟಿ ತುಳಸಿ ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳು ಮರಗಳನ್ನು ನೆಡುವುದು, ಅವುಗಳ ಪಾಲನೆ-ಪೋಷಣೆ ಮಾಡುವುದು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು, ಅಲ್ಲದೇ ನಮ್ಮ ಪರಿಸರವನ್ನು ಪ್ಲಾಸ್ಟಿಕ್ ಮುಕ್ತ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್.ಆರ್. ಪಬ್ಲಿಕ್ ಸ್ಕೂಲ್, ಹೆಬ್ರಿಯ ಸಹ ಶಿಕ್ಷಕರಾದ ಶ್ರೀ ವಿನಯ ವೈದ್ಯ ಅವರು ಮಾತನಾಡಿ, ಪರಿಸರ ಸಂರಕ್ಷಣೆಗಾಗಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹಸಿರು ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳಲು ಗ್ರೀನ್ ಜೀನ್ ಕ್ಲಬ್ ನಿಮಗೆಲ್ಲ ಪ್ರೇರಣೆಯಾಗಲಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ ಹೆಬ್ರಿ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕರಾದ ಶುಭಲಕ್ಷ್ಮಿ, ಸಹ-ಸಂಯೋಜಕರಾದ ಶುಭಾ ಎಂ. ಉಪಸ್ತಿತರಿದ್ದರು. ವಿದ್ಯಾರ್ಥಿ ಪ್ರತಿನಿಧಿ ಅಭಿನವ ಐತಾಳ್ ತುಳಸಿ ಗಿಡದ ಮಹತ್ವ ಮತ್ತು ಉಪಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗ್ರೀನ್ ಜೀನ್ ಕ್ಲಬ್ ಕಾರ್ಯದರ್ಶಿ ಪೂರ್ವಿ ನಿರೂಪಿಸಿ, ಅಮೂಲ್ಯ ವಂದಿಸಿದರು.



















