ಕಾರ್ಕಳ ನಗರದ ಶಿವತಿಕೆರೆ ಸಮೀಪ ರವಿವಾರ ರಾತ್ರಿ ಸಂಭವಿಸಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ (ನಂದಳಿಕೆ) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ರವಿವಾರ ಸಂಜೆ ಕಾರ್ಕಳದಿಂದ ಸುಮಾರು 7.30ರ ವೇಳೆಗೆ ಸ್ಕೂಟಿಯಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ, ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಇಂಡಿಕೇಟರ್ ನೀಡಿ ಯೂ-ಟರ್ನ್ ಪಡೆಯಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಅತಿ ವೇಗವಾಗಿ ಬಂದ ಬೈಕ್ ಸ್ಕೂಟಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಶಿವಪ್ರಸಾದ್ ರಾವ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಗಾಯಗಳ ತೀವ್ರತೆಯ ಕಾರಣ ಚಿಕಿತ್ಸೆಯು ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಕಂದಾಯ ಇಲಾಖೆಯ ಕರ್ತವ್ಯನಿಷ್ಠ ಅಧಿಕಾರಿಯಾಗಿದ್ದ ಶಿವಪ್ರಸಾದ್ ರಾವ್ ಅವರ ನಿಧನಕ್ಕೆ ತಾಲೂಕು ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯರು ತೀವ್ರ ಸಂತಾಪ ಸೂಚಿಸಿದ್ದಾರೆ.


















