ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯಾ. ಗಜಾನನ ಭಟ್ ಭಟ್ ಅವರಿದ್ದ ಪೀಠ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಕೂಡ ಕೋರ್ಟ್ ಹಾಲ್ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಈ ಪ್ರಕರಣದ ಕೊನೆಯ ವಿಚಾರಣೆ ಜುಲೈ 30 ರಂದು ನಡೆದಿತ್ತು. ಸರ್ಕಾರಿ ಪರ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಹಾಜರಾಗಿದ್ದರು.
ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿ ಇಂದಿಗೆ ಮುಂದೂಡಿತ್ತು.
ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಮಹತ್ವ ಪಡೆದಿದೆ. ಈ ಪ್ರಕರಣ ಅಲ್ಲದೇ ಇನ್ನೂ 2 ಪ್ರಕರಣದಲ್ಲಿ ತೀರ್ಪು ಬರಬೇಕಿದೆ.