
ಬ್ರಹ್ಮಾವರ ಪೊಲೀಸರು ಪ್ರಕರಣ ಒಂದರ ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕರೆದೊಯುತ್ತಿದ್ದ ವೇಳೆ ಕಾರ್ಕಳ ಹೊಸ್ಮಾರಿನಲ್ಲಿ ಅಡಿಷನಲ್ ಎಸ್ಪಿ ಅವರ ವಾಹನಕ್ಕೆ ತಿಮರೋಡಿ ಅವರ ಬೆಂಬಲಿಗರ ಕಾರು ಢಿಕ್ಕಿಯಾದ ಘಟನೆ ಸಂಭವಿಸಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ರಾಜೀವ್ ಕುಲಾಲ್ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸರು ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲೇ ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಅವರ ಹಿಂದೆ ಬರುತ್ತಿದ್ದ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್ ವಾಹನಕ್ಕೆ ಗುದ್ದಿ ಕರ್ತವ್ಯಕ್ಕೆ ಅಡ್ಡಿ ಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯಕ್ಕೆ ಕಾರು ಸಹಿತ ವಾಹನದಲ್ಲಿದ್ದ ಸೃಜನ್, ಹಿತೇಶ್ ಶೆಟ್ಟಿ, ಸುಜಿತ್ ಮಡಿವಾಳ ಅವರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡರು.












