ರಾಜ್ಯ ರಾಜಕೀಯ ಬೆಳವಣಿಗೆಯೊಂದರಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೆಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ.ಭೇಟಿಯ ಬಗ್ಗೆ ನಿಖಿಲ್ ಕುಮಾರಸ್ವಾಮಿಯವರು ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ನಿಖಿಲ್ ಹೇಳಿಕೊಂಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್- ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಎಂದು ನಿಖಿಲ್ ತಿಳಿಸಿದ್ದಾರೆ.
ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಅಮಿತ್ ಶಾ, ಜೆಪಿ ನಡ್ಡಾ ಮತ್ತು ಕುಮಾರಸ್ವಾಮಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿತ್ತು. ಸೀಟು ಹಂಚಿಕೆ ಸೇರಿ ಹಲವು ವಿಚಾರಗಳ ಬಗ್ಗೆ ಗಹನವಾದ ಚರ್ಚೆ ನಡೆದಿತ್ತು. ಮೈತ್ರಿ ಏರ್ಪಡುವಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಮಹತ್ವದ ಪಾತ್ರ ವಹಿಸಿದ್ದರು. ಬಳಿಕ ಅಮಿತ್ ಶಾ, ಜೆಪಿ ನಡ್ಡಾ ಎಕ್ಸ್ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ದೋಸ್ತಿಯನ್ನು ಖಚಿತಪಡಿಸಿದ್ದರು. ಎನ್ಡಿಎ ಕೂಟಕ್ಕೆ ಜೆಡಿಎಸ್ ಸೇರ್ಪಡೆಗೊಂಡಿರುವುದು ಸಂತಸ ತಂದಿದೆ. ಪ್ರಧಾನಿ ಮೋದಿ ಅವರ ಆಶಯಗಳನ್ನು ಸಾಕಾರಗೊಳಿಸಲು ಈ ಮೈತ್ರಿ ನೆರವಾಗಲಿದೆ ಎಂದು ತಿಳಿಸಿದ್ದರು.