Saturday, January 24, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್ : ಸಂಭ್ರಮ ಸಡಗರದೊಂದಿಗೆ ಅದ್ದೂರಿಯಾಗಿ ನಡೆದ ‘ಮಕ್ಕಳ ಹಬ್ಬ’

ಕ್ರೈಸ್ಟ್ ಕಿಂಗ್ : ಸಂಭ್ರಮ ಸಡಗರದೊಂದಿಗೆ ಅದ್ದೂರಿಯಾಗಿ ನಡೆದ ‘ಮಕ್ಕಳ ಹಬ್ಬ’

ಜನಮನ ಸೂರೆಗೊಂಡ ಮಕ್ಕಳ ಕಲಾಪ್ರದರ್ಶನ, ಅಹಾರ ಮತ್ತು ಮನೋರಂಜನಾ ಮಳಿಗೆಗಳು

ಕಾರ್ಕಳದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ “ಮಕ್ಕಳ ಹಬ್ಬ” ಕಾರ್ಯಕ್ರಮ ಅದ್ದೂರಿಯಾಗಿ ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿಯವರು ದೀಪ ಬೆಳಗಿ ಮಕ್ಕಳ ಹಬ್ಬಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯು ಅನೇಕ ಹೊಸ ಹೊಸ ಯೋಜನೆಗಳನ್ನು ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿರುವುದು ಸಂತೋಷದ ವಿಷಯವಾಗಿದೆ. ನೀವು ಅದರ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಿ” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ ಅವರು ಮಾತನಾಡಿ “ಮಕ್ಕಳು ಬಾಲ್ಯದಲ್ಲಿಯೇ ಕನಸುಗಳನ್ನು ಕಾಣಬೇಕು. ನೀವು ಕಾಣುವ ಕನಸುಗಳು ನನಸಾಗಬೇಕಾದರೆ ನಿರಂತರ ಪ್ರಯತ್ನ ಪಡಬೇಕು. ಹಾಗಾದಾಗ ಮಾತ್ರ ನೀವು ಬದುಕಿನಲ್ಲಿ ಯಶಸ್ವಿಯಾಗಲು ಸಾಧ್ಯ” ಎಂದು ಹೇಳಿದರು.

ಇನ್ನೋರ್ವ ಅತಿಥಿ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಕ ಶಿವರಾಮ್‌ಬಾಬು ಎಂ. ಅವರು ಮಾತನಾಡಿ “ಪಾಠದ ಜೊತೆಗೆ ಕ್ರೀಡೆಗೆ ಕೂಡಾ ವಿದ್ಯಾರ್ಥಿಗಳು ಗಮನ ನೀಡಿದಾಗ ಅವರ ದೈಹಿಕ ಆರೋಗ್ಯ ಉತ್ತಮವಾಗಿರಲು ಸಾಧ್ಯ. ನೀವು ನಿಮ್ಮ ಆರೋಗ್ಯ ಉತ್ತಮವಾಗಿರಿಸಿಕೊಳ್ಳುವುದರ ಜೊತೆಗೆ ನಿಮ್ಮ ಮನೆಗಳಲ್ಲಿ ಒಂದೊಂದು ಗಿಡವನ್ನು ನೆಟ್ಟು, ಬೆಳೆಸಿ ಪರಿಸರ ಸಂರಕ್ಷಣೆಯನ್ನು ಮಾಡಿ” ಎಂದು ಕರೆ ನೀಡಿದರು.

ಕಾರ್ಕಳ ರೋಟರಿ ಕ್ಲಬ್‌ನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ, “ವಿದ್ಯಾರ್ಥಿಗಳು ಎಳವೆಯಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಿ” ಎಂದು ಹೇಳಿದರು.

ಕರಾಟೆಯಲ್ಲಿ ರಾಜ್ಯ ಮಟ್ಟದಲ್ಲಿ ಕ್ರೀಡಾಸ್ಫೂರ್ತಿಯನ್ನು ಮೆರೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕುಮಾರಿ ಸುಧೀಕ್ಷಾರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ಧರು. ನಂತರ ಗಣ್ಯರು ಮಕ್ಕಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳ ಪ್ರದರ್ಶನ, ಚಿತ್ರಕಲೆ ಹಾಗೂ ಕ್ರಾಫ್ಟ್, ಮಕ್ಕಳಿಂದಲೇ ನಡೆಸಲ್ಪಡುವ ಆಹಾರ ಮಳಿಗೆಗಳು, ಮನೋರಂಜನಾ ಆಟಗಳ ಮಳಿಗೆಗಳನ್ನು ಉದ್ಘಾಟಿಸಿದರು.

ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್, ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮಿ ನಾರಾಯಣ ಕಾಮತ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ, ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಸಂಸ್ಥೆಯ ಆಪ್ತ ಸಮಾಲೋಚಕಿ ಸಿ.ಡಾ. ಶಾಲೆಟ್ ಸಿಕ್ವೇರಾ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಯಾನಂದ್ ಪದವಿಪೂರ್ವ ವಿಭಾಗ, ಸರಿಟಾ ನೊರೊನ್ಹ ಪ್ರೌಢಶಾಲಾ ವಿಭಾಗ ಹಾಗೂ ಉದಯರವಿ ಪ್ರಾಥಮಿಕ ವಿಭಾಗ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ, ಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ, ವಿವಿಧ ತಿಂಡಿ ತಿನಿಸುಗಳು ಹಾಗೂ ಮನೋರಂಜನಾ ಆಟಗಳ ಸ್ಟಾಲ್, ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮುಂತಾದವುಗಳು ನಡೆಯಿತು. ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನ ಸ್ನೇಹಲತಾರವರು ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಆಂಗ್ಲಭಾಷಾ ಶಿಕ್ಷಕಿ ಶ್ರೀಮತಿ ಆಲಿಸ್ ಲೋಬೋ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments