
ಕಾರ್ಕಳದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ನಗರ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ಶೇಖರ್ ನಾಯ್ಕ್ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿದರು.
ರಾಷ್ಟ್ರೀಯ ವಾಲಿಬಾಲ್ ಆಟಗಾರ, ಕಾರ್ಕಳದ ಝಕ್ರಿಯಾ ಎಂ ಅವರು ಕ್ರೀಡಾ ಜ್ಯೋತಿ ಬೆಳಗಿದರು. ಕಾರ್ಕಳ ಯುವಜನ ಸೇವಾ ಅಧಿಕಾರಿ ಹಾಗೂ ಸರಕಾರಿ ಪ್ರೌಢಶಾಲೆ, ಹಿರ್ಗಾನ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಸಮಾಲೋಚಕಿಯಾದ ಡಾ.ಸಿಸ್ಟರ್ ಶಾಲೆಟ್ ಸಿಕ್ವೇರಾ ಅವರು ಕ್ರೀಡಾಳುಗಳ ಪರಿಚಯ ಸ್ವೀಕರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶೇಖರ್ ನಾಯ್ಕ್ ಅವರು “ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಿಸ್ತು, ಸಂಯಮದಿಂದ ಜೀವನ ನಡೆಸಲು ಕ್ರೀಡೆಯು ಸಹಾಯ ಮಾಡುತ್ತದೆ. ಬಾಲ್ಯದಿಂದಲೇ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಸಂಸ್ಕಾರಯುತ ಜೀವನವನ್ನು ನಡೆಸಬೇಕು” ಎಂದು ಹೇಳಿದರು.
ಝಕ್ರಿಯಾ ಎಂ ಅವರು ಮಾತನಾಡಿ “ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯ ಮಹತ್ವವನ್ನು ಅರಿತುಕೊಂಡು ಅದನ್ನು ಬದುಕಿನಲ್ಲಿ ಅಳವಡಿಸಿಕೊಂಡು ಶಾಲೆಗೆ ಹಾಗೂ ದೇಶಕ್ಕೆ ಕೀರ್ತಿ ತರುವವರಾಗಬೇಕು” ಎಂದರು.
ಸಂತೋಷ್ ಕುಮಾರ್ ಶೆಟ್ಟಿ ಅವರು ಮಾತನಾಡಿ “ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆಯು ಸಹಾಯ ಮಾಡುತ್ತದೆ. ಎಲ್ಲರೂ ಉತ್ಸಾಹದಿಂದ ಈ ಕ್ರೀಡಾಹಬ್ಬದಲ್ಲಿ ಭಾಗವಹಿಸಿ” ಎಂದು ಹೇಳಿದರು.
ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನ ಕಾರ್ಯದರ್ಶಿಗಳಾದ ಅವೆಲಿನ್ ಲೂಯಿಸ್ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಕ್ರೀಡಾ ಪಥಸಂಚಲನ ಹಾಗೂ ಕ್ರೀಡಾಜ್ಯೋತಿ ಮೆರವಣಿಗೆ ನಡೆಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮಿ ನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರುಗಳಾದ ಕಾಲೇಜು ವಿಭಾಗದ ದಯಾನಂದ, ಪ್ರೌಢಶಾಲಾ ವಿಭಾಗದ ಶೆರಿಟಾ ನೊರೋನ್ಹ, ಪ್ರಾಥಮಿಕ ವಿಭಾಗದ ಉದಯರವಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರಥಮ ವಾಣಿಜ್ಯ ವಿಭಾಗದ ಕೀರ್ತನ್ ಡಿ’ಸೋಜ ಸ್ವಾಗತಿಸಿ ಹತ್ತನೇ ತರಗತಿಯ ಆಯಿಷಾ ರೂಬ ವಂದಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಪಾವನ ಧನ್ಯರಾಜ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಕೃಷ್ಣ ಪ್ರಸಾದ್, ಪ್ರಕಾಶ್ ನಾಯ್ಕ್, ಶ್ರೀಮತಿ ಲಾವಣ್ಯ ಕ್ರೀಡಾಕೂಟ ಸಂಘಟಿಸಿದರು.




