ಮಂಗಳೂರು ವಿಶ್ವವಿದ್ಯಾಲಯದ 44ನೇ ಘಟಿಕೋತ್ಸವ ಇಂದು ಬೆಳಗ್ಗೆ 11ಕ್ಕೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದರು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭಾಗವಹಿಸಲಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. 162 ಪಿಎಚ್.ಡಿ, 56 ಚಿನ್ನದ ಪದಕ, 57 ನಗದು ಬಹುಮಾನ ಪ್ರದಾನ ಮಾಡಲಾಗುವುದು. 147 ರ್ಯಾಂಕ್ ಘೋಷಿಸಲ್ಪಟ್ಟಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ದಾಖಲಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಗಮನಾರ್ಹವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಬಾರಿ 22,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 19,568(ಶೇ.88.74) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ನಾತಕ(ಯುಜಿ) ವಿಭಾಗದಲ್ಲಿ 18,825ರಲ್ಲಿ 16,541(ಶೇ.87.87), ಸ್ನಾತಕೋತ್ತರ(ಪಿಜಿ) ವಿಭಾಗದಲ್ಲಿ 3,225ರಲ್ಲಿ 3,027(ಶೇ.93.86) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದರು.
ಪರೀಕ್ಷಾಂಗ ಕುಲಸಚಿವ ದೇವೇಂದ್ರಪ್ಪ, ಆಡಳಿತ ಕುಲಸಚಿವ ಗಣೇಶ್ ಸಂಜೀವ್, ಕನ್ನಡ ವಿಭಾಗ ಮುಖ್ಯಸ್ಥ ಪ್ರೊ.ನಾಗಪ್ಪ ಗೌಡ, ಹಣಕಾಸು ಅಧಿಕಾರಿ ಪ್ರೊ.ಪಂಚಲಿಂಗ ಸ್ವಾಮಿ ಇದ್ದರು.
ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಯಕ್ಷಗಾನ ಕಲಾವಿದ ಸೂರಿಕುಮೇರು ಕೆ.ಗೋವಿಂದ ಭಟ್(ಮರಣೋತ್ತರ), ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಕಲಾವಿದ ಕೆ.ಗೋವಿಂದ ಭಟ್ ಅವರ ಪದವಿಯನ್ನು ಏ.13ರಂದು ಅವರ ನಿವಾಸದಲ್ಲಿ ಪ್ರದಾನ ಮಾಡಲಾಗುವುದು. ದೈವ ನರ್ತಕರೊಬ್ಬರಿಗೆ ಮಂಗಳೂರು ವಿವಿಯಿಂದ ಇದೇ ಮೊದಲ ಬಾರಿ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು.



















